Jul 262009
 

ಶ್ರೀನಾಥ್ ಭಲ್ಲೆಮೂಗಿಗೆ ಹತ್ತಿ ತುರುಕುವ ಮುನ್ನ

 

ಜಂಜಟ್ಟಿನ ಜಗಕೆ ಜಾರೋ ಮುನ್ನ
ಪುಟ್ಟ ಕೋಟೆಯಲಿ ನೀ ಸುಖವಪಡು

ತಾರತಮ್ಯವನು ಅರಿಯೋ ಮುನ್ನ
ಎಲ್ಲರೊಂದಿಗೆ ಬೆರೆತು ಒಂದಾಗಿಬಿಡು

ಪಾಲಕರು ಸ್ಪರ್ಧೆಗೊಡ್ಡೋ ಮುನ್ನ
ಕುಣಿದಾಡಿ ಬಿಡು ನಲಿದಾಡಿ ಬಿಡು

ಕಳೆವುದ, ಭಾಗಿಸುವದ ಕಲಿಯೋ ಮುನ್ನ
ಕೂಡಿಸಿ, ವೃದ್ದಿಸಿ ಖುಷಿಯಪಡು

ಸಂಸಾರ ಸಾಗರದ ಸುಳಿ ಸೆಳೆಯೋ ಮುನ್ನ
ಸ್ವಚ್ಚಂದದ ತಂಗಾಳಿಯಲಿ ತೇಲಿಬಿಡು

ರೋಗರುಜಿನಗಳು ನಿನ್ನಲ್ಲರಳೋ ಮುನ್ನ
ನರಳೋ ರೋಗಿಗಳ ಬಗ್ಗೆ ಕರುಣೆ ಇಡು

ಮೂಗಿಗೆ ಹತ್ತಿ ತುರುಕೋ ಮುನ್ನ
ನಿರ್ಮಲ ಮನದಲ್ಲೊಮ್ಮೆ ಉಸಿರಾಡಿಬಿಡು

ಬಾಯಿಗೆ ಅಕ್ಕಿ ತುಂಬಿಸೋ ಮುನ್ನ
ತಪ್ಪುಗಳಿಗೆ ಕ್ಷಮೆ ಯಾಚಿಸಿಬಿಡು

ನಾಲ್ಕು ಕಾಲಿನ ರಥವೇರೋ ಮುನ್ನ
ಸೌದೆಗೆ ಬೆಂಕಿ ಹಚ್ಚೋ ಮುನ್ನ
ಕ್ರೋಧ ಬಿಡು, ಆಕ್ರೋಶ ಬಿಡು
ಇದ್ದುದರಲ್ಲೇ ಸಂತೃಪ್ತಿ ಪಡು
ಸಜ್ಜನರ ಸಂಗದಿ ಸುಖವ ಪಡು

 

ಭವ ಬಂಧನ

ಹೊರಗೆಡಹಲು ಎನ್ನ ಮನದಾಳದ ಅಳಲು
ಮೂಲೆ ಹಿಡಿದು ನಾ ಗಟ್ಟಿಯಾಗಿ ಅಳಲು

ತಲೆ ನೇವರಿಸಿದಳು ತಾಯಂತಹ ಅತ್ತೆ
ಏನಂತಹ ದುಗುಡ ನೀನೇಕೆ ಅತ್ತೆ

ಸೂರ್ಯ ತಾ ಮುಳುಗಿಹನು ಇದು ಸಂಧ್ಯಾಕಾಲ
ಇಂಥದೇ ಸಂಜೆ ಅಪ್ಪನ ಜೀವಕದು ಸಂಧ್ಯಾಕಾಲ

ಹೇಳಲಾಗಲಿಲ್ಲ ಹೃದಯದಿ ಅಡಗಿದ್ದ ಭಾವ
ಇದ್ದುದಿಬ್ಬರೇ ಸಂತೈಸಲು ಆ ನನ್ನ ಅಕ್ಕ ಭಾವ

ಅಕ್ಕಗೆ ನುಡಿದಿದ್ದನವ ಇವಳನ್ನು ನೀ ಸಾಕು
ಬಂಧುಗಳಿಲ್ಲದ ಈ ಊರು ಅವಳಿಗಿನ್ನು ಸಾಕು

ಹೆತ್ತಮ್ಮನಿಲ್ಲ, ಸಲುಹಿದ ಅಪ್ಪನಿಲ್ಲ, ಏನಾಗುವುದೋ ಎನ್ನ ಬಾಳು
ಕಂಕಣ ಬಲ ಒದಗಿಸಿ ಹರಸಿಹಳು ಅಕ್ಕ ನೀ ನೂರ್ಕಾಲ ಬಾಳು

ತಂಪನೆಯ ಗಾಳಿಯೊಂದಿಗೆ ಸೂರ್ಯ ಮುಳುಗುವಾ ಹೊತ್ತು
ಬಂದಿದ್ದಳು ಅಕ್ಕ ದೂರಾಗುವ ಸಂದೇಶವಾ ಹೊತ್ತು

ಮುಪ್ಪಾದವರ ಸೇವೆಗೆ ಭಾವನ ಕೂಗಿ ಕರೆದಿತ್ತು ಕರ್ತವ್ಯದ ಕರೆ
ಏಂದೋ ಒಮ್ಮೆ ನೋಡುವ ಅಕ್ಕಳಿಗಿನ್ನು ಕೇವಲ ದೂರವಾಣಿ ಕರೆ

ಎನ್ನವರೆಲ್ಲ ದೂರಾಗುತ್ತಿಹರತ್ತೆ ನಾನೇನ ಮಾಡಿರುವೆ ಪಾಪ
ಹೊಟ್ಟೆ ಹಸಿವಿನಿಂದ ಅಳಲು ಹತ್ತಿತ್ತು ಮಲಗಿದ್ದ ನನ್ನ ಪಾಪ

ನವ ಬಂಧನವು ಸೆಳೆದಾಗ ಹಳೆ ಬಂಧನಗಳು ಹರಿವುದೇ?
ಹಳೆ ಬಂಧನದ ಮೌಲ್ಯ ನವ ಪೀಳಿಗೆಯಲ್ಲೂ ಹರಿವುದೇ?

ಟಿಪ್ಪಣಿ :- ಹಲವಾರು ಬಾರಿ ಪದವೊಂದೇ ಆದರೂ ಅವುಗಳ ಅರ್ಥ ಬೇರೆ ಇರುತ್ತದೆ. ಅಂತಹ ಕೆಲವು ಪದಗಳನ್ನು ತೆಗೆದುಕೊಂಡು ಕವನ ರೂಪದಲ್ಲಿ ಭವ ಬಂಧನದ ಬಗೆಗಿನ ಒಂದು ಸನ್ನಿವೇಶವನ್ನು ಹೆಣೆದಿದ್ದೇನೆ. ಕವನದಲ್ಲಿ ಅಕ್ಕ-ತಂಗಿಯರ ಬಾಂಧವ್ಯವಿದೆ. ತಂದೆಯ ಸ್ಥಾನದಲ್ಲಿ ನಿಲ್ಲುವ ಭಾವನ ಚಿತ್ರಣವಿದೆ. ಹೊಸ ಬಂಧನಕ್ಕೆ ಸಿಲುಕುತ್ತಿದ್ದಂತೆ ಜೊತೆ ಹಳೆಯ ಬಾಂಧವ್ಯವು ಮಸುಕಾಗುವ ಕ್ರೂರ ಸತ್ಯವೂ ಅಡಕವಾಗಿದೆ. ಅದಲ್ಲದೆ, ನಾವು ಒಬ್ಬರಿಗೆ ಋಣಿಯಾಗಿದ್ದೇವೆ ಎಂದು ನಮ್ಮ ಮುಂದಿನವರೂ ಅದರಂತೆ ಋಣಿಯಾಗಿರಬೇಕೇ ಎಂಬ ಪ್ರಶ್ನೆಯೂ ಇದೆ…. ನಿಮಗೆ ಉತ್ತರ ಗೊತ್ತೆ ?

 Posted by at 10:00 PM
Jul 262009
 

ದತ್ತಾತ್ರಿ ಎಂ.ಆರ್. ವೈರಸ್ ಉಡುಗೊರೆ

 

 

ಲಾಸ್ ಏಂಜಲಿಸ್ ನಗರದಿಂದ ದಕ್ಷಿಣಕ್ಕೆ ಸ್ಯಾನ್ ಡಿಯಾಗೋ ಎನ್ನುವ ಊರಿನ ಹಾದಿಯಲ್ಲೇ ನಾನಿರುವ ಊರಿರುವುದು. ಇದು ಮೆಕ್ಸಿಕೋ ದೇಶಕ್ಕೆ ಗಡಿ ಪ್ರದೇಶ. ಫ್ರೀವೇ ೫ರಲ್ಲಿ ಹೊರಟು ದಕ್ಷಿಣದ ಕಡೆ ಸಾಗುತ್ತಾ ಸಾನ್ ಈಸಿಡ್ರೊ ಎನ್ನುವ ಊರಿನ ಬಳಿ ಕೊನೆಯ ಎಕ್ಸಿಟ್ ತೆಗೆದುಕೊಳ್ಳುವುದ ಮರೆತಿರೋ ಗಡಿರೇಖೆಯಲ್ಲಿ ಇಮ್ಮಿಗ್ರೇಷನ್ ಆಫೀಸರನ ಮುಂದೆಯೇ ಇರುತ್ತೀರಿ. ಆ ಇಮ್ಮಿಗ್ರೇಷನ್ ಆಫೀಸರನ ಆಚೆಯ ಬದಿಯಲ್ಲೇ ಸ್ಪಾನಿಷ್ ಭಾಷೆ ಧಾರೆಯಾಗಿ ಉಕ್ಕಿ ಹರಿಯುವ ಮತ್ತು ಥೇಟ್ ನಮ್ಮ ಗಾಂಧೀಬಜಾರ್ ಮಾರ್ಕೆಟ್‍ನಂತೆಯೇ ಕಾಣುವ ಟಿಹುಆನ ಎನ್ನುವ ಮೆಕ್ಸಿಕನ್ ಊರು. ನಿಮಗೇನಾದರೂ ವೀಸಾ ಸಮಸ್ಯೆಯಿದ್ದರೆ ಈ ಕೊನೆಯ ಅಮೆರಿಕನ್ ಎಕ್ಸಿಟ್‍ನ್ನು ನೀವು ಮರೆಯದಿರುವುದು ಒಳ್ಳೆಯದು. ಏಕೆಂದರೆ ಮೆಕ್ಸಿಕೋ ಹೊಕ್ಕ ನಂತರ ಅಮೆರಿಕಾಕ್ಕೆ ಮರುಪ್ರವೇಶ ನಿಮಗೆ ನಿಷಿದ್ಧವಾಗಿ ಅಲ್ಲೇ ಉಳಿದುಕೊಂಡು ಮೈದಾ ಚಪಾತಿಗೆ ಈರುಳ್ಳಿ ಅವಕೆಡೋ ಕಂದುಬಣ್ಣದ ಬೀನ್ಸ್ ಮತ್ತು ಕೆಂಪನ್ನವನ್ನು ಸುತ್ತಿದ ಬರಿಟೋ ತಿನ್ನುತ್ತಾ ಫುಟ್‌ಪಾತ್‌ನಲ್ಲಿ ಜಾಗ ಹಿಡಿದು ಒಬಾಮನ ಮುಖಚಿತ್ರ ಹೊತ್ತ ಟೀಶರ್ಟುಗಳು ಮತ್ತು ಅಮೆರಿಕನ್ ಟೂರಿಸ್ಟರು ಜಾಸ್ತಿ ಕೊಳ್ಳುವ ಮಾಯನ್ನರ ಬಣ್ಣ ಬಣ್ಣದ ಮುಖವಾಡಗಳನ್ನು ಮಾರುತ್ತಾ ಜೀವನ ಸಾಗಿಸಬೇಕಾದೀತು! ಅಥವಾ, ಗಡಿಯುದ್ದಕ್ಕೂ ಪೋಲೀಸರಿಗಿಂತಲೂ ಹೆಚ್ಚು ಸಕ್ರಿಯವಾಗಿರುವ ಮತ್ತು ಪೋಲೀಸರಿಗಿಂತಲೂ ಹೆಚ್ಚು ಸಂಬಳ ಕೊಡುವ ಡ್ರಗ್ ಮಾಫಿಯಾದ ಜೊತೆಗೂ ಕೆಲಸ ಮಾಡಬಹುದು!

ಮೆಕ್ಸಿಕನ್ನರಿಗೆ ಮಾತ್ರ ಈ ದೇಶಕ್ಕೆ ಬರುವುದು ಎಂದರೆ ಬಾಲನ್ನು ಅರೆಸುತ್ತಾ ಪಕ್ಕದ ಮನೆಯ ಕಾಂಪೌಂಡನ್ನು ಹಾರುತ್ತಿದ್ದೆವೆಲ್ಲ ನಾವು ಚಿಕ್ಕವಯಸ್ಸಿನಲ್ಲಿ, ಅಷ್ಟೇ ಸುಲಭ. ಹಣದ ಅಗತ್ಯಬಿದ್ದಾಗ ಅಥವ ಕೆಲಸ ಮಾಡದೆ ಮೈ ಜಡ್ಡು ಹಿಡಿಯಿತು ಎನ್ನಿಸಿದಾಗಲೆಲ್ಲಾ ಹಕ್ಕಿಗಳಂತೆ ಯಾವ ಬಂಧವೂ ಇಲ್ಲದೆ ಗಡಿರೇಖೆ ಹಾರಿಬಂದು ಬ್ಯಾಂಕ್ ಆಫ್ ಅಮೆರಿಕಾದ ನಲ್ವತ್ತೇಳನೇ ಅಂತಸ್ತನ್ನು ಗುಡಿಸಿ ಮೆಟ್‍ಲೈಫ್ ಕಾನ್‍ಫರೆನ್ಸ್ ರೂಮುಗಳನ್ನು ಒರೆಸಿ, ನೂರೈವತ್ತು ಡಾಲರಿಗೆ ಮೂವತ್ತೈದು ವರ್ಷ ಹಳೆಯ ಪಿಕಪ್ ಟ್ರಕ್‍ ಒಂದನ್ನು ಕೊಂಡು ಇನ್ಸುರೆನ್ಸ್‍ನ ಗೋಜೇ ಇಲ್ಲದೆ ಲಾಸ್ ಏಂಜಲಿಸ್‍ನ ತುಂಬೆಲ್ಲಾ ಗುಡುಗುಡು ಶಬ್ದ ಮಾಡುತ್ತಾ ಓಡಾಡಿ, ಮೆಕ್‍ಆರ್ಥರ್ ಪಾರ್ಕಿನಲ್ಲಿ ಚೀಪಾದ ಬಿಯರ್ ಕುಡಿದು ಸ್ಟಾಪಲ್ಸ್ ಸೆಂಟರಿನ ಮುಂದೆ ಕ್ಯಾಮೆಲ್ ಬ್ರಾಂಡಿನ ಸಿಗರೇಟು ಎಳೆದು ಹಾಗೆಯೇ ಡೌನ್‍ಟೌನಿನ ರಸ್ತೆಗಳಲ್ಲಿ ಓಡಾಡಿಕೊಂಡಿರುವಾಗಲೇ ಅಮ್ಮನ ಆರೋಗ್ಯ ಚಿಂತಾಜನಕ ಎಂದು ಸುದ್ದಿ ಬಂದೊಡನೆಯೇ ಬಂದ ರೀತಿಯಲ್ಲೇ ಹಕ್ಕಿಯಂತೆ ಗಡಿಯ ಗೋಡೆಯನ್ನು ಹಾರಿ ಮೆಕ್ಸಿಕೋದೊಳಗೆ ಕಣ್ಮರೆಯಾಗುತ್ತಾನೆ. ಆಲೆಮನೆಯ ಗಾಣದೆತ್ತಿನಂತೆ ಬರೀ ಆಫೀಸು ಮನೆಯ ವೃತ್ತದಲ್ಲಿ ಸುತ್ತುವ ನನ್ನಂತವರಿಗೆ ಅವನು ಬಂದದ್ದೂ ತಿಳಿಯುವುದಿಲ್ಲ ಹಾಗೆಯೇ ಹೋದದ್ದೂ ಕೂಡ.

ಇಂತಹ ಮೆಕ್ಸಿಕನ್ನರಿಂದ ಪ್ರಪಂಚಕ್ಕೊಂದು ಫ್ಲೂ ಬಂದಿದೆ. ಅದು ಕೊಂದದ್ದು ಬರೀ ಹತ್ತಿಪ್ಪತ್ತು ಜನರನ್ನಾದರೂ, ಒಂದು ರೀತಿಯ ವಿನಾಶದ ಭಯ, “ನಾವು ಉಸಿರಾಡುತ್ತಿರುವ ಗಾಳಿಯಲ್ಲೇ ದೆವ್ವ ಒಂದು ಓಡಾಡುತ್ತಿದೆ” ಎನ್ನುವಂತಹ ವಿನಾಶದ ಅಂಜಿಕೆಯನ್ನು ನಮ್ಮಲ್ಲಿ, ವಿಶೇಷವಾಗಿ ಮೆಕ್ಸಿಕೋದ ನೆರೆರಾಜ್ಯ ಅಮೆರಿಕಾದಲ್ಲಿ, ಅದರಲ್ಲೂ ವಿಶೇಷವಾಗಿ ಮೆಕ್ಸಿಕೋಕ್ಕೆ ಹೊಂದಿಕೊಂಡ ಗಡಿಪ್ರದೇಶದ ಊರುಗಳಲ್ಲಿ ಆಳವಾಗಿ ಊರಿಸಿಬಿಟ್ಟಿದೆ. “ನಾವು ಮೊದಲಿಂದಲೂ ಹೇಳುತ್ತಿರಲಿಲ್ಲವೇ ನಮ್ಮನ್ನು ವಿನಾಶ ಮಾಡುವಂತಹ ಸಾಂಕ್ರಾಮಿಕವೊಂದು ಹರಡುತ್ತದೆಯೊಂದು, ಇದೇ ಇದೇ ಅದು ನೋಡಿ” ಎಂದು ಯೂನಿವರ್ಸಿಟಿಯ ವಿಜ್ಞಾನಿಗಳು ಮತ್ತು ಹೆಲ್ತ್ ಡಿಪಾರ್ಟಮೆಂಟುಗಳು ತಮ್ಮ ವಾದದ ಗಟ್ಟಿತನವನ್ನು ತೋರಿಸುವ ಬರದಲ್ಲಿ ಹೆದರಿದವರನ್ನು ಮತ್ತೂ ಹೆದರಿಸುತ್ತಿವೆ.

ಈ ನಡುವೆ, ಎಲ್ಲವನ್ನೂ ಅತೀ ಮಾಡುವ ಅಮೆರಿಕನ್ ಮಾದ್ಯಮಗಳು ಜನರು ಮರೆಯದಂತೆ “ಸಾಂಕ್ರಾಮಿಕ ಭಯವನ್ನು” ಜಾಗೃತಿಯಲ್ಲಿಟ್ಟು ರೋಗದ ಟ್ವೆಂಟಿಫೋರ್ ಬೈ ಸೆವೆನ್ ಕವರೇಜ್ ನೀಡುತ್ತಿವೆ. ಮೆಕ್ಸಿಕೋ ನಗರದ ಸರಕಾರಿ ಆಸ್ಪತ್ರೆಗೆ ದಾಖಲಾದ ಆರುವರ್ಷದ ಹುಡುಗನ ಹರಿದ ಚಡ್ಡಿಯಿಂದ ಹಿಡಿದು ಗೋಡೆಯ ಮೇಲೆ ಧ್ಯಾನಸ್ಥವಾದ ಕಂದು ಬಣ್ಣದ ಠೊಣಪ ಹಲ್ಲಿಯ ತನಕ ಎಲ್ಲವನ್ನೂ ನೇರ ಪ್ರಸಾರ ಮಾಡಲಾಗುತ್ತಿದೆ. ಇದ್ದಕ್ಕಿದ್ದಂತಲೇ ಪ್ರಪಂಚದ ದೃಷ್ಟಿ ಮೆಕ್ಸಿಕೋನತ್ತ ಹರಿದಿದೆ.

ಇತಿಹಾಸಬಲ್ಲವರಿಗೆ ವೈರಸ್ ಜೊತೆಗಿನ ಮೆಕ್ಸಿಕೋದ ನಂಟು ಇವತ್ತಿನದಲ್ಲ ಎನ್ನುವುದು ಸ್ಪಷ್ಟವಾಗಿ ತಿಳಿದಿದೆ. ಐದುನೂರು ವರ್ಷಗಳ ಹಿಂದೆ ಭಾರತವನ್ನು ಹುಡುಕುತ್ತೇನೆ ಎಂದು ಅಮೆರಿಕಾಕ್ಕೆ ಬಂದಿಳಿದ ಕೊಲಂಬಸ್ ಅಲ್ಲಿದ್ದ ಮೂಲನಿವಾಸಿಗಳಿಗೆ ಮೊದಲು ಕೊಟ್ಟ ಉಡುಗೊರೆ ಎಂದರೆ ಸಿಡುಬಿನ ವೈರಸ್. ಹಡಗುಗಳಲ್ಲಿ ಬಂದಿಳಿದ ಉಕ್ಕಿನ ಕವಚದ ಸ್ಪಾನಿಯಾರ್ಡರು ಮತ್ತು ಬರೀ ಲಂಗೋಟಿಯಲ್ಲಿ ನಿಂತಿದ್ದ ಮೆಕ್ಸಿಕೋದ ಮೂಲ ನಿವಾಸಿಗಳು ಒಬ್ಬರನ್ನೊಬ್ಬರು ನೋಡಿದೊಡನೆಯೇ ಹಸ್ತಲಾಘವ ಕೊಡಲಿಲ್ಲ, ಒಬ್ಬರನ್ನೊಬ್ಬರು ತಬ್ಬಿಕೊಳ್ಳಲಿಲ್ಲ. ಯುರೋಪಿಗಿಂತಲೂ ಹಳೆಯದಾದ ನಾಗರೀಕತೆಯನ್ನು ಹೊಂದಿದ್ದರೂ ಪೂರ್ತೀ ಮೈ ಮುಚ್ಚುವಂತೆ ಬಟ್ಟೆ ಹಾಕಿಕೊಳ್ಳದ ಮತ್ತು ಲೋಹವನ್ನೇ ಕಾಣದೆ ಬರೀ ಬೆತ್ತದ ಕೋಲು ಹಿಡಿದು ಯುದ್ಧಕ್ಕೆ ಬರುವ ಈ ಮೂಲನಿವಾಸಿಗಳನ್ನು ಕೊಲಂಬಸ್ “ಅರೆ ಮಾನವರು” ಎಂದು ಕರೆದ. ಈ ಅರೆ ಮಾನವರನ್ನು ಪೂರ್ತೀ ಮಾನವರನ್ನಾಗಿಸಲು ಕೊಲಂಬಸ್‍ನ ದೇಹದ ವೈರಸ್‍ಗಳು ಆ ತನಕ ಈ ತರಹದ ವೈರಸ್‍ನ್ನೇ ಕಾಣದ ಮೂಲ ನಿವಾಸಿಗಳ ದೇಹವನ್ನು ಹೊಕ್ಕವು. ಅಂದು ಯುದ್ಧದಿಂದ ಸತ್ತದ್ದು ಹತ್ತು ಸಾವಿರವಾದರೆ ಯುರೋಪಿಯನ್ನರು ಕೊಟ್ಟ ರೋಗದಿಂದ ಸತ್ತದ್ದು ಹತ್ತು ಲಕ್ಷ. ಉಕ್ಕಿನ ಎದೆ ಕವಚ, ಉಕ್ಕಿನ ಶಿರಸ್ತ್ರಾಣವನ್ನು ತೊಟ್ಟು ಆಳೆತ್ತರದ ಉಕ್ಕಿನ ಕತ್ತಿಯನ್ನು ಹಿಡಿದು ಕುದುರೆಯೇರಿ ಬಂದ ಸ್ಪಾನಿಯಾರ್ಡರನ್ನು ಮೂಲನಿವಾಸಿಗಳು ಇವರು ದೇವರಿರಬಹುದು ಎಂದು ತಿಳಿದರಂತೆ. ದೇವರೋ ಅಲ್ಲವೋ ಎಂದು ಪರೀಕ್ಷಿಸಲು ತಮ್ಮ ಪಂಡಿತರನ್ನು ಕಳುಹಿಸಿದಾಗ ಆ ಪಂಡಿತರು ಒಂದು ತಟ್ಟೆಯಲ್ಲಿ ಮನುಷ್ಯರ ಆಹಾರವಾದ ಜೋಳದ ಟಾರ್ಟಿಯಾಗಳು, ಈರುಳ್ಳಿ, ಮೆಣಸು, ಸೀಬೇಹಣ್ಣು, ಕೋಳಿಯ ಮಾಂಸವನ್ನು ಮತ್ತು ಇನ್ನೊಂದು ತಟ್ಟೆಯಲ್ಲಿ ದೇವರಿಗೆ ಪ್ರಿಯವಾದ ಬಲಿಕೊಟ್ಟ ಪ್ರಾಣಿಯ ಹಸಿಮಾಂಸ ಮತ್ತು ಹಸಿ ರಕ್ತವನ್ನು ಹಾಕಿ ಸ್ಪಾನಿಯಾರ್ಡರ ಮುಂದೆ ಇಟ್ಟರು. ಅವರ ಪ್ರಕಾರ ಈ ಉಕ್ಕಿನ ಜೀವಿಗಳು ಮಾನವನ ಆಹಾರವನ್ನು ಸ್ವೀಕರಿಸಿದರೆ ಆಗ ಇವರ ಮಾನವರೆಂದೂ ಇವರ ಮೇಲೆ ಯುದ್ಧ ಮಾಡಬಹುದೆಂದೂ, ಅವರೇನಾದರೂ ಭಗವಂತನ ಆಹಾರವನ್ನು ಸ್ವೀಕರಿಸಿದರೆ ಆಗ ಅವರು ದೇವರೆಂದು ಮತ್ತು ಅವರಿಗೆ ಶರಣಾಗುವುದೆಂದು ಪಂಡಿತರ ಯೋಜನೆ. ಹಡಗಿನಲ್ಲಿನ ದೂರದ ಪಯಣದಿಂದ ಹಸಿದುಬಂದಿದ್ದ ಸ್ಪಾನಿಯಾರ್ಡರು ಎರಡೂ ತಟ್ಟೆಯ ಆಹಾರವನ್ನು ತಿಂದರು. ಹಾಗೆಯೇ ಮಾನವರಾಗಿ ಯುದ್ಧಮಾಡಿ ಕೊನೆಗೆ ತಮ್ಮ ಕತ್ತಿಯ ಬಲದಿಂದ ದೇವರಾಗಿ ಈ ಮೂಲನಿವಾಸಿಗಳನ್ನು ಶರಣಾಗತರನ್ನಾಗಿಸಿಕೊಂಡರು. ಆ ದೇವರುಗಳೇ ವೈರಸ್ಸನ್ನು ವರವಾಗಿ ನೀಡಿ ಅರೆ ಮಾನವರನ್ನು ಪೂರ್ಣವಾಗಿಸುವಾಗ ಇಲ್ಲವೆನ್ನಲಾಗುತ್ತದೆಯೇ?

ಐನೂರು ವರ್ಷಗಳ ಹಿಂದೆ ತಾವು ಪಡೆದ ಬಳುವಳಿಯನ್ನು ಇವತ್ತು ಪ್ರಪಂಚಕ್ಕೆ ವಾಪಸ್ಸು ನೀಡಿ ಮೆಕ್ಸಿಕನ್ನರು ಋಣಮುಕ್ತರಾಗುತ್ತಿದ್ದಾರೆ. ಐನೂರು ವರ್ಷಗಳಿಂದ ತಾವು ಜತನವಾಗಿ ಕಾಪಾಡಿದ ಬಳುವಳಿಯನ್ನು ಚೆಂದವಾಗಿ ಗಿಫ್ಟ್ ಪ್ಯಾಕ್ ಮಾಡಿ ಅಂದಕ್ಕಾಗಿ ಹಂದಿಯ ಮುಖವಿಟ್ಟು ತಾವು ಪಡೆದ ರೀತಿಯಲ್ಲೇ ಹಡಗು ವಿಮಾನ ಬಸ್ಸು ಕುದುರೆಗಳಲ್ಲಿ ವೈರಸ್ಸನ್ನು ವಾಪಸ್ಸು ಕಳಿಸುತ್ತಾ ಮೆಕ್ಸಿಕನ್ನರು ವಿನೀತರಾಗಿ ಪ್ರಪಂಚಕ್ಕೆ ಬದಲು ಉಡುಗೊರೆ ನೀಡುತ್ತಿದ್ದಾರೆ. ಇದೋ, ಸ್ವೀಕರಿಸಿ!

 Posted by at 9:54 PM
Jul 262009
 

ಮೈ. ಶ್ರೀ. ನಟರಾಜಶಕುನಿಯ ದಾಳ

ಒಂಬತ್ತು-ಹನ್ನೊಂದರಂದು
ಅನಿರೀಕ್ಷಿತ ಆಘಾತಕ್ಕೆ ನಡುಗಿ
ಬೆಂಕಿಯುಂಡೆಯ ಶಾಖವುಂಡು
ಕರುಗುತ್ತಾ ತನ್ನೊಳಕ್ಕೇ ಕುಸಿದು ಉಡುಗಿ
ನಿಜಮಾಡಿಬಿಟ್ಟೆ ನಾಣ್ನುಡಿಯ ಮಾತು
“ಅತ್ಯುನ್ನತಿಯೆ ಪತನಕ್ಕೆ ಹೇತು” (೧)

ಬೆಳೆದಷ್ಟು ಬೆಳೆದಷ್ಟು ಎತ್ತರ
ಸಹಸ್ರಾಕ್ಷನಾಗಿ ಹುಡುಕುತ್ತಿರಬೇಕು
ಸುತ್ತಲೂ ವೈರಿಗಳ ಪೂರ್ವೋತ್ತರ
ವಿಶ್ವಸಿರಿಕೇಂದ್ರ ಆಗಿದ್ದೇನೋ ದಿಟ
ಅವಳಿ-ಜವಳಿಗಳಾಗಿ ಹುಟ್ಟಿ ಬೆಳೆದು
ನೀವಾಡಿದ್ದೆ ಆಟ ಹೂಡಿದ್ದೆ ಹೂಟ (೨)

ಒಮ್ಮೆ ಕರಗಿದಮೇಲೆ ಆ ಸೊಕ್ಕು
ಮಿಕ್ಕದ್ದು ಬರಿ ಒಂದಷ್ಟು ಉಕ್ಕು
ಉರಿದುಳಿದ ನಿನ್ನ ಅಸ್ಥಿಪಂಜರಕ್ಕು
ಏಳುವರ್ಷಗಳಲ್ಲೆ ಪುನರ್ಜನ್ಮ ಸಿಕ್ಕು
ಹುಟ್ಟಿದೆ ನೋಡು ಮತ್ತೊಂದು ಯುದ್ಧನೌಕೆ
ಹೊಡೆತಕ್ಕೆ ಕಾಯುತ್ತ ಕೂರದಿರು ಜೋಕೆ (೩)

ಎಲೆ ಯುದ್ಧನೌಕೆ, ಯುಎಸೆಸ್ ನ್ಯೂಯಾರ್ಕೆ
ವೈರಿಗಳ ಹುಡುಕಲು ತಡವಿನ್ನೇಕೆ
ಉಗ್ರರ ಹಿಡಿಯಲು ಬೇಡ ಹಿಂಜರಿಕೆ
ಕುರುನಾಡಬಿಟ್ಟು ನೀ ನಡೆ ಗಾಂಧಾರಕೆ
ಸತ್ತು ಮತ್ತೆ ಚಿಗುರಿದ ಮೂಳೆಯ ದಾಳ
ಮುಗಿಸಲಿಲ್ಲವೇ ಕೌರವೇಂದ್ರನ ಬಾಳ? (೪)

ಸಿರಿಕೇಂದ್ರದುರಿಯಿಂದ ಹುಟ್ಟಿಬಂದೀ ಅಸ್ತ್ರ
ಆಗಿಬಿಡಲಿ ವೈರಿಗಳ ಸುಡುವ ಮಾರಕಾಸ್ತ್ರ
ಉರುಳಿಸು ಉಗ್ರರನು ಮತ್ತೆ ತಲೆಯೆತ್ತದಂತೆ
ಕಿತ್ತೊಗೆ ಬೇರುಗಳ ಮತ್ತೆಂದೂ ಚಿಗುರದಂತೆ
ದಾಳಗಳನುರುಳಿಸುತ ಗರಗಳನು ಕೇಳು
ಒಂಬತ್ತು-ಹನ್ನೊಂದು ಬೀಳದಿದ್ದರೆ ಕೇಳು! (೫)

ಟಿಪ್ಪಣಿ :- ಸೆಪ್ಟೆಂಬರ್ ಹನ್ನೊಂದು, ಎರಡುಸಾವಿರದ ಒಂದರಂದು ಸಿರಿಕೇಂದ್ರದ ಜೋಡಿ ಕಂಬಗಳು ಉಗ್ರರ ವಿಮಾನದ ಬಡಿತಕೆ ಸಿಕ್ಕು ಕುಸಿದನಂತರ, ಅಲ್ಲಿ ಕರಗಿದ ಉಕ್ಕನ್ನು ಬಳಸಿ ಯುಎಸೆಸ್ ನ್ಯೂಯಾರ್ಕ್ ಎಂಬ ಯುದ್ಧನೌಕೆಯೊಂದನ್ನು ಕಟ್ಟಿ ಸಿದ್ಧಗೊಳಿಸಲಾಗಿದೆ. ವಿಶ್ವದಾದ್ಯಂತ ಉಗ್ರರ ವಿರುದ್ಧ ಧಾಳಿ ನಡೆಸುವ ಸಲುವಾಗೇ ಕಟ್ಟಿದ ಈ ನೌಕೆಯನ್ನು ಇಲ್ಲಿ ಶಕುನಿಯ ದಾಳಕ್ಕೆ ಹೋಲಿಸಲಾಗಿದೆ. ಕೌರವನ ದ್ವೇಷಕ್ಕೆ ಪಾತ್ರರಾದ ಶಕುನಿಯ ಸಮಸ್ತ ಕುಟುಂಬವನ್ನು ಸೆರೆಯಲ್ಲಿಟ್ಟು ಒಬ್ಬರಿಗಾಗುವಷ್ಟು ಮಾತ್ರ ಆಹಾರವನ್ನು ಕೊಡುತ್ತಿದ್ದರಂತೆ. ತಮ್ಮೆಲ್ಲರ ಆಹಾರವನ್ನು ಶಕುನಿಗೆ ಕೊಟ್ಟು ಅವನನ್ನು ಉಳಿಸಿ ತಮ್ಮ ಪ್ರಾಣಗಳನ್ನು ತ್ಯಾಗಮಾಡಿದ ಅವರೆಲ್ಲರ ಆಶಯ ಏನಿತ್ತೆಂದರೆ, ಉಳಿದುಕೊಂಡ ಶಕುನಿ ಏನಾದರೂ ಕುತಂತ್ರಮಾಡಿ ಕೌರವರನ್ನು ನಿರ್ನಾಮಗೊಳಿಸಲಿ ಎಂಬುದೇ ಆಗಿತ್ತು. ಶಕುನಿ ತನ್ನ ಅಣ್ಣತಮ್ಮಂದಿರ ಮೂಳೆಯಿಂದ ಮಾಡಿದ ದಾಳಗಳನ್ನು ಪಗಡೆಯ ಜೂಜಿನಾಟಕ್ಕೆ ಉಪಯೋಗಿಸಿದನಂತೆ. ಅವನಿಗೆ ಕೇಳಿದ ಗರ ಬಿಳುತ್ತಿತ್ತಂತೆ.  ಅದೇರೀತಿ, ಬಿನ್ ಲಾಡೆನ್ ಮುಂತಾದ ಉಗ್ರರನ್ನು ಕೊಲ್ಲಲು ಆ ಸಿರಿಕೇಂದ್ರದ ಜೋಡಿ ಕಂಬಗಳಲ್ಲಿ ಬಲಿಯಾಗಿ ಕರಗಿದ ಉಕ್ಕು ಮೂರು ಸಾವಿರ ಜನರ ಮೂಳೆಯಿಂದ ಬಲಗೊಂಡು ಈ ಯುದ್ಧನೌಕೆಯ ರೂಪತಾಳಿದೆ ಎಂಬುದೇ ಇಲ್ಲಿನ ಪ್ರತಿಮೆ.

 Posted by at 9:46 PM